ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ ಮೊಹರಂ ಹಬ್ಬದ ವೇಳೆ ಆಕಸ್ಮಿಕವಾಗಿ ಅಲಾಯಿ ಕುಣಿ ಬೆಂಕಿಗೆ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಹನುಮಂತ (45) ಎಂದು ತಿಳಿದು ಬಂದಿದೆ.
ಮೊಹರಂ ಹಬ್ಬದ ಕಫಲ್ ರಾತ್ರಿ ಆಚರಣೆಗೆ ಗ್ರಾಮದ ಹಸನ್ ಹುಸೇನ್ ಆಲಂಗಳ ದರ್ಗಾದ ಮುಂದೆ ಅಲಾಯಿ ಕುಣಿಯಲ್ಲಿ ಕೆಂಡ ಹಾಯಲು ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಲಾಗಿತ್ತು. ಈ ಸಂದರ್ಭ ಹನುಮಂತು ಬೆಂಕಿಗೆ ಬಿದ್ದಿದ್ದಾನೆ. ತಕ್ಷಣ ಸ್ಥಳದಲ್ಲಿದ್ದವರು ಆತನ ನೆರವಿಗೆ ಧಾವಿಸಿ, ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ. ಅಷ್ಟರಲ್ಲಿ ದೇಹ ಬೆಂಕಿಯಿಂದ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.
ಅಲಾಯಿ ಕುಣಿಯಿಂದ ಮೇಲೆತ್ತುವುದರೊಳಗೆ ಗಂಭೀರವಾಗಿ ಗಾಯಗೊಂಡಿದ್ದ ಹನುಮಂತನಿಗೆ ಲಿಂಗಸುಗೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಕಿ ಕೆನ್ನಾಲಿಗೆಯಲ್ಲಿ ದೇಹ ಸುಟ್ಟಿರುವುದರಿಂದ ತೀವ್ರವಾಗಿ ಗಾಯಗೊಂಡಿರುವ ಹನುಮಂತ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.