ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಜಿತೆಂದ್ರ ಜಗದೀಶ ಪಡ್ತಿ (20) ಎಂದು ತಿಳಿದು ಬಂದಿದೆ.
ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಈತ ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದ ಎಂದು ತಿಳಿದು ಬಂದಿದೆ.
ಕಾಲೇಜಿನಲ್ಲಿ ಈತ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಪ್ರೇಮ ನಿವೇದನೆ ಕೂಡ ಮಾಡಿದ್ದ. ಆದರೆ, ಆಕೆ ಆತನೊಂದಿಗೆ ಸ್ನೇಹದಲ್ಲಿ ಇದ್ದು, ಪ್ರೀತಿಯನ್ನು ನಿರಾಕರಿಸಿದ್ದಳು. ಈತ ಬೇರೆ ಬೇರೆ ನಂಬರ್ನಿಂದ ಕಾಲ್ ಮಾಡಿ ಪ್ರೀತಿ ಮಾಡುವಂತೆ ಪೀಡಿಸಿದ್ದ. ಆಕೆ ನಿರಾಕರಿಸುತ್ತಾ ಬಂದಿದ್ದರಿಂದ ಮನನೊಂದು ಆಕೆ ಮತ್ತು ಆಕೆಯ ಕುಟುಂಬದವರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಮುಂದಾಗಿದ್ದ.
ಮನೆಯಲ್ಲಿದ್ದವರು ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮನೆಯ ಎರಡೂ ಬದಿಯಲ್ಲಿ ಬಾಗಿಲು ಹಾಕಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ.
ಮನೆಯಿಂದ ಬೆಂಕಿಯ ಹೊಗೆ ಬರುತ್ತಿರೋದು ಗಮನಿಸಿದ ಯುವಕನ ಪೋಷಕರು ಕೂಡಲೇ ಆತನನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದು, ಬಹುತೇಕ ಬೆಂಕಿಯಿಂದ ಸುಟ್ಟುಹೋಗಿದ್ದ ಆತನನ್ನು ಕಾರವಾರದ ಕ್ರಿಮ್ಸ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.