ಚಿಕ್ಕಬಳ್ಳಾಪುರ: ಪೊಲೀಸ್ ಮುಖ್ಯ ಪೇದೆಯೊಬ್ಬರು ಆನ್ಲೈನ್ ಗೇಮ್ ಬೆಟ್ಟಿಂಗ್ ದಂಧೆಯಲ್ಲಿ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ಮಂಚೇನಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ರಾಜಶೇಖರ್ (28) ಎಂದು ತಿಳಿದು ಬಂದಿದೆ.
ಬುಧವಾರ ಎಂದಿನಂತೆ ಕರ್ತವ್ಯಕ್ಕೆ ಬಂದಿದ್ದ ರಾಜಶೇಖರ್, ಕರ್ತವ್ಯ ಮುಗಿಸಿ ಮಧ್ಯಾಹ್ನ ವಿಶ್ರಾಂತಿ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಆನ್ಲೈನ್ ಗೇಮ್ನಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸಿ, ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ಎಸ್.ಶಿವಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.